ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ತರಬೇಕು. ಎಸ್ಮಾ ಜಾರಿಗೂ ಬಗ್ಗುವುದಿಲ್ಲ ಎಂದು ಪಟ್ಟು ಹಿಡಿದಿರುವ ಸಾರಿಗೆ ನೌಕರರ ಒಕ್ಕೂಟ  ಅನಿರ್ದಿಷ್ಟಾವಧಿ ಮುಷ್ಕರಕ್ಕೆ (KSRTC workers protest )ಕರೆ ನೀಡಿದೆ.

ಹೀಗಾಗಿ, ರಾಜ್ಯದಲ್ಲಿಂದು ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರು ತಮ್ಮ ಕರ್ತವ್ಯಕ್ಕೆ ಗೈರಾಗುವುದರ ಮೂಲಕ ಪ್ರತಿಭಟನೆಗೆ ಇಳಿದಿದ್ದಾರೆ. ಮುಷ್ಕರದ‌ ನಿಮಿತ್ತ ಯಾವೊಬ್ಬ ಸಿಬ್ಬಂದಿಯೂ ಕರ್ತವ್ಯಕ್ಕೆ ಹಾಜರಾಗಲಿಲ್ಲ.ಇದರಿಂದಾಗಿ ಸದಾ ಗಿಜಿಗುಡುತ್ತಿದ್ದ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ. ಹಲವೆಡೆ ಪ್ರಯಾಣಿಕರು ಪರದಾಡುತ್ತಿರುವ ದೃಶ್ಯ ಕಂಡುಬರುತ್ತಿದೆ. ಕೆಎಸ್‌ಆರ್‌ಟಿಸಿ, ಈಶಾನ್ಯ, ನೈರುತ್ಯ ಸಾರಿಗೆಯ ಬಸ್‌ಗಳು ಸೇರಿ 70 ಲಕ್ಷದಿಂದ 80 ಲಕ್ಷ ಪ್ರಯಾಣಿಕರು ಇಂದು ತೊಂದರೆ ಅನುಭವಿಸಬೇಕಾಗಿದೆ.

ರಾಜ್ಯದ ಎಲ್ಲಾ ಜಿಲ್ಲಾಡಳಿತ, ಪೊಲೀಸ್ ಹಾಗೂ ಸಾರಿಗೆ ಅಧಿಕಾರಿಗಳ ನೇತೃತ್ವದಲ್ಲಿ ಬೆಳಗಾವಿ, ವಿಜಯಪುರ, ಗದಗ, ಹಾಗೂ ವಿವಿಧ ಭಾಗಗಳಲ್ಲಿ ಖಾಸಗಿ ಬಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ. ಆದರೂ ಪ್ರಯಾಣಿಕರಿಗೆ ಸಮಸ್ಯೆ ಉಂಟಾಗುತ್ತಿದೆ. ಖಾಸಗಿ ವಾಹನಗಳ ಮಾಲೀಕರು ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವುದಲ್ಲದೆ ಹತ್ತು ಜನ ಕೂಡುವ ಸ್ಥಳದಲ್ಲಿ ಹದಿನೈದಕ್ಕೂ ಹೆಚ್ಚು ಜನರನ್ನು ಕೂಡಿಸುತ್ತಿದ್ದಾರೆ. ಇದರಿಂದಾಗಿ ಪ್ರಯಾಣಿಕರು, ವಯೋವೃದ್ಧರು, ಮಕ್ಕಳು, ಮಹಿಳೆಯರಿಗೆ ಸಮಸ್ಯೆಯಾಗುತ್ತಿದೆ.

ನಿತ್ಯ, ಗಿಜಿಗುಡುತ್ತಿದ್ದ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್‌ಗಳು ನಿಂತಲ್ಲೇ ನಿಂತಿದ್ದು, ಕೆಲ ಪ್ರಯಾಣಿಕರು ಬಸ್ ಹೊರಡುವುದನ್ನೇ ನಿರೀಕ್ಷಿಸುತ್ತಿರುವ ದೃಶ್ಯ ಕಂಡುಬಂದಿದೆ. ಕೆಲ ಕಾರ್ಮಿಕರು ಊರಿಗೆ ತೆರಳಲು ಸಾಧ್ಯವಾಗದೆ ಪರಿತಪಿಸುತ್ತಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್‌ಗಳು ಬಂದು ನಿಂತಿವೆ. ಜೀಪ್, ಟಾಟಾ ಸುಮೋ ಸೇರಿದಂತೆ ಇತರ ಖಾಸಗಿ ವಾಹನಗಳು ಬಸ್ ನಿಲ್ದಾಣದ ಎದುರುಗಡೆ ಪ್ರಯಾಣಿಕರಿಗಾಗಿ ನಿಂತಿರುವ ದೃಶ್ಯಗಳು ಕಂಡುಬಂತು.

ಅನಿವಾರ್ಯವಾಗಿ ಪ್ರಯಾಣಿಕರು ಪ್ರಯಾಣಿಕರು ಊರಿಗೆ ತೆರಳಲು ಖಾಸಗಿ ವಾಹನಗಳನ್ನೇ‌ ಅವಲಂಬಿಸಬೇಕಿದೆ. ಬೆಂಗಳೂರು, ವಿಜಯಪುರ, ಕಲಬುರಗಿ, ಕೋಲಾರ, ಮಂಡ್ಯ, ಬೀದರ್, ರಾಯಚೂರು, ಹುಬ್ಬಳ್ಳಿ, ಬಳ್ಳಾರಿ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರಯಾಣಿಕರು ಖಾಸಗಿ ಬಸ್‌, ಆಟೋ, ಕ್ಯಾಬ್‌ಗಳ ಮೊರೆ ಹೋಗಿದ್ದಾರೆ.

ಟಂ ಟಂ ಸೇರಿದಂತೆ ಖಾಸಗಿ ವಾಹನಗಳ ಚಾಲಕರು ಊರಿಗೆ ಕರೆದೊಯ್ಯಲು ಹೆಚ್ಚಿನ ಹಣ ಕೇಳುತ್ತಿದ್ದಾರೆ. ಮಕ್ಕಳು-ಮರಿ ಕಟ್ಟಿಕೊಂಡು ಬಂದಿದ್ದೇವೆ. ಏನು ಮಾಡುವುದು ಎಂದು ಕುಟುಂಬದ ಸದಸ್ಯರು ಅಳಲು ವ್ಯಕ್ತಪಡಿಸುತ್ತಿದ್ದಾರೆ. ಆಯ್ದ ಮಾರ್ಗಗಳಲ್ಲಿ ಖಾಸಗಿ ಬಸ್ ಸಂಚಾರ ಆರಂಭಗೊಂಡಿದೆ. ಮುಷ್ಕರದ ಮಾಹಿತಿ ಇದ್ದುದರಿಂದ ನಿಲ್ದಾಣದಲ್ಲಿ  ಪ್ರಯಾಣಿಕರ ಸಂಖ್ಯೆಯೂ ಕಡಿಮೆ ಇದೆ.

Leave a Reply

Your email address will not be published. Required fields are marked *